Rajesh Naik

ತನ್ನ ಶಾಸಕತ್ವ ಅವಧಿಯಲ್ಲಿ ಪ್ರತಿ ಗ್ರಾಮಕ್ಕೂ ಅನುದಾನ

ಬಂಟ್ವಾಳ ಕ್ಷೇತ್ರಕ್ಕೆ ತನ್ನ ಶಾಸಕತ್ವ ಅವಧಿಯಲ್ಲಿ ಪ್ರತಿ ಗ್ರಾಮಗಳಿಗೂ ಅನುದಾನ ನೀಡಲಾಗಿದೆ. 400 ಕೋಟಿ ರೂ.ಗಳಿಗಿಂತಲೂ ಅಧಿಕ ಅನುದಾನ ವಿನಿಯೋಗಿಸಿ ಅಭಿವೃದ್ಧಿ ಕಾರ್ಯ ನಡೆಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಂಡಲ ಮಹಾಶಕ್ತಿ ಕೇಂದ್ರಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯಿಂದ ನೇಮಕಗೊಂಡಿರುವ ಪ್ರಮುಖರ ಸಭೆಯಲ್ಲಿ ಮಾತನಾಡಿದರು.

ಕೇಂದ್ರ ಸರಕಾರದ ಅನುದಾನವು ನೇರ ಪಂಚಾಯಿತಿಗಳಿಗೆ ಈಗಾಗಲೇ ಬಂದಿದ್ದು, ಮುಂದಿನ ದಿನದಲ್ಲಿ ವರ್ಷಕ್ಕೆ ಕೋಟಿ ಅನುದಾನ ಬರುವ ಯೋಜನೆ ಇದೆ ಎಂದರು.

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರೆಲ್ಲ ಒಟ್ಟಾಗಿ ಚುನಾವಣೆ ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ ಅವರು, ಮುಂದಿನ ಗ್ರಾಪಂ ಚುನಾವಣೆಯಲ್ಲಿ ಎಲ್ಲ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಚುನಾವಣಾ ಪೂರ್ವ ತಯಾರಿ ಬಗ್ಗೆ ಪೂರ್ಣ ಮಾಹಿತಿಯನ್ನು ಬಂಟ್ವಾಳದ ಮಂಡಲದ ಪಂಚಾಯಿತಿ ಚುನಾವಣಾ ಪ್ರಭಾರಿ ದೇವದಾಸ್‌ ಶೆಟ್ಟಿ ನೀಡಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಅವರು ರಾಜ್ಯ ಬಿಜೆಪಿ ನೀಡಿದ ಕಾರ್ಯಸೂಚಿ ಬಗ್ಗೆ ಮಾಹಿತಿ ನೀಡಿದರು.

ಬಂಟ್ವಾಳ ಬಿಜೆಪಿ ಉಪಾಧ್ಯಕ್ಷ ಚಿದಾನಂದ ರೈ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರವೀಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Back To Top
Highslide for Wordpress Plugin